October 6, 2025
1000694441
ದೇವದುರ್ಗ: ಪರಿಸರವನ್ನು ಉಳಿಸಿ, ಬೆಳೆಸುವುದು ಮತ್ತು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ದೇವದುರ್ಗ ಪುರಸಭೆ ಆಡಳಿತದ ಮುಖ್ಯ ಅಧಿಕಾರಿ ಕೆ. ಹಂಪಯ್ಯ ಅವರು ಕರೆ ನೀಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು, ದೇವದುರ್ಗ ಪ್ರಗತಿಪರ ಒಕ್ಕೂಟ, ದಲಿತಪರ ಸಂಘಟನೆಗಳು, ಕನ್ನಡಪರ ಸಂಘ ಸಂಸ್ಥೆಗಳು, ನಾಗರಿಕ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಮನವಿ ಮೇರೆಗೆ ಪುರಸಭೆ ಆಡಳಿತವು ‘ಹಸಿರು ಉಸಿರು ಅಭಿಯಾನ’ಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಪುರಸಭೆಯು ಮಹಿಳಾ ಸ್ವಸಹಾಯ ಗುಂಪುಗಳ ಸಹಯೋಗದೊಂದಿಗೆ ದೇವದುರ್ಗದ ವಿವಿಧ ವಾರ್ಡುಗಳಲ್ಲಿರುವ ಉದ್ಯಾನವನಗಳಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಹಂಪಯ್ಯ ಅವರು, “ಮನೆಗೊಂದು ಮರ, ಊರಿಗೊಂದು ವನ” ಎಂಬಂತೆ ಅರಣ್ಯ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸುವುದು ಅಗತ್ಯ ಎಂದರು.
ಶಾಲಾ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳ ಆವರಣಗಳಲ್ಲಿ ಮರ-ಗಿಡಗಳನ್ನು ಬೆಳೆಸುವುದು ಇಂದಿನ ಪರಿಸ್ಥಿತಿಗೆ ಅತಿ ಮುಖ್ಯವಾಗಿದೆ. ಅರಣ್ಯ ನಾಶ ಮತ್ತು ಪರಿಸರ ನಾಶದಿಂದ ವಾತಾವರಣದಲ್ಲಿ ಏರುಪೇರು ಉಂಟಾಗುತ್ತದೆ. ಆದ್ದರಿಂದ, ಎಲ್ಲರೂ ಪರಿಸರ ಪ್ರೇಮಿಗಳಾಗಿ ಪರಿಸರವನ್ನು ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಈ ಕಾರ್ಯದಲ್ಲಿ ಸಂಘ-ಸಂಸ್ಥೆಗಳು ಮತ್ತು ಸಮುದಾಯಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪುರಸಭೆ ವ್ಯವಸ್ಥಾಪಕರಾದ ಗಂಗಾಧರ್ ಡೇ ನಲ್, ಕಾರ್ಯಾಲಯದ ಸಿಬ್ಬಂದಿಗಳಾದ ಅನಿಲ್ ಕುಮಾರ್ ಬಲಿದವ, ಅಂಬಿಕಾ, ಶ್ರುತಿ ಶೆಟ್ಟಿ, ಪಾರ್ವತಿ ಪಾರ್ವತಿ ಸೇರಿದಂತೆ ವಿವಿಧ ಸ್ವಸಹಾಯ ಗುಂಪುಗಳ ಮಹಿಳೆಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!